ಶಕ್ತಿ ವಸತಿ ಶಾಲೆಯ ಪೂರ್ವಪ್ರಾಥಮಿಕ ಹಾಗೂ ಪ್ರಾಥಮಿಕ ವಿಭಾಗದ ವಾರ್ಷಿಕ ಕ್ರೀಡಾಕೂಟವು ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು, ಶಕ್ತಿನಗರ ಇಲ್ಲಿಯ ಮೈದಾನದಲ್ಲಿ ಅ. 16 ರಂದು ನಡೆಯಿತು.


ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿನ ಅರ್ಥಶಾಸ್ತ್ರದ ಹಿರಿಯ ಉಪನ್ಯಾಸಕರಾಗಿರುವ ಶ್ರೀಮತಿ ಸರಳಾ ದೇವಿ ಇವರು ಶಾಲಾ ಧ್ವಜವನ್ನು ಏರಿಸಿ ಶಾಂತಿ ಸೌಹಾರ್ದದ ಸಂಕೇತವಾಗಿರುವ ಪಾರಿವಾಳವನ್ನು ಹಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಕಾರ್ಯಕ್ರಮದಲ್ಲಿ ಪುಟ್ಟ ಪುಟ್ಟ ಮಕ್ಕಳ ಉತ್ಸಾಹವನ್ನು ಹುರಿದುಂಬಿಸಿ ಎಲ್ಲಾ ಪುಟಾಣಿಗಳಿಗೂ ಶುಭವನ್ನು ಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಶಕ್ತಿ ವಿದ್ಯಾ ಸಂಸ್ಥೆಯ ಮುಖ್ಯ ಸಲಹೆಗಾರರಾಗಿರುವ ಶ್ರೀ ರಮೇಶ್ ಕೆ ಮಾತನಾಡಿ ನಮ್ಮ ಶಕ್ತಿ ಶಾಲೆಯಲ್ಲಿ ಕ್ರೀಡೆಗೆ ನಿರಂತರ ಪ್ರೋತ್ಸಾಹ ದೊರೆಯುತ್ತಿದೆ. ಭವಿ?ದಲ್ಲಿ ನಮ್ಮ ಶಕ್ತಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ಬಳಿಕ ವೇದಿಕೆಯಲ್ಲಿದ್ದ ಎಲ್ಲಾ ಗಣ್ಯರು ಸೇರಿ ಮುಖ್ಯ ಅತಿಥಿಗಳಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿರುವ ಶ್ರೀ ವೆಂಕಟೇಶ್ ಮೂರ್ತಿ ಹೆಚ್, ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆ ಶ್ರೀಮತಿ ಬಬಿತಾ ಸೂರಜ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಈ ಕ್ರೀಡಾಕೂಟದಲ್ಲಿ ವಿವಿಧ ಸ್ಫರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕಗಳನ್ನು ವಿತರಿಸಿ ಪ್ರೋತ್ಸಾಹಿಸಲಾಯಿತು.
ವಿದ್ಯಾರ್ಥಿಗಳ ಶಿಸ್ತುಬದ್ಧವಾದ ಪಥಸಂಚಲನ ಹಾಗೂ ಡ್ರಿಲ್ ಆಕರ್ಷಣೀಯವಾಗಿತ್ತು. ಶಿಕ್ಷಕಿ ಶ್ರೀಮತಿ ಸೀಮಾ ಸ್ವಾಗತಿಸಿದರು, ಶ್ರೀಮತಿ ಪೂಜಾ ಕಾರ್ಯಕ್ರಮವನ್ನು ನಿರೂಪಿಸಿದರು.








