Call Us :
+91 96860 00046
Admission Open
+91 9108043552 info@shakthi.edu.in Follow us on Facebook Youtube Login

ಉಪನ್ಯಾಸಕರ ವಿಷಯಾಧಾರಿತ ತರಬೇತಿ ಕಾರ್ಯಾಗಾರ

ಮಂಗಳೂರಿನ ಶಕ್ತಿನಗರದ ಶಕ್ತಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 30 ಹಾಗೂ 31 ನೇ ಡಿಸೆಂಬರ್ 2019 ರಂದು ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಹಾಗೂ ಉಪನ್ಯಾಸಕರನ್ನು ಪುನಶ್ಚೇತನಗೊಳಿಸುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸರಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರಿಗೆ 2 ದಿನಗಳ ವಿಷಯಾಧಾರಿತ ತರಬೇತಿ ಕಾರ್ಯಾಗಾರವನ್ನು ಕರ್ನಾಟಕ ಸರ್ಕಾರದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಮ್ಮಿಕೊಂಡಿತ್ತು. ಈ ಕಾರ್ಯಾಗಾರದಲ್ಲಿ ಸುಮಾರು 500 ಕ್ಕೂ ಹೆಚ್ಚು ಉಪನ್ಯಾಸಕರು ಭಾಗವಹಿಸಿದ್ದರು.

ಪದವಿ ಪೂರ್ವ ಶಿಕ್ಷಣ ಇಲಾಖೆಯ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಉಪನಿರ್ದೇಶಕ ಶ್ರೀ ವಿಷ್ಣುಮೂರ್ತಿಯವರು 2 ದಿನದ ಕಾರ್ಯಾಗಾರದ ಬಗ್ಗೆ ಸ್ಥೂಲ ಪರಿಚಯ ಮಾಡಿಕೊಟ್ಟರು. ರಾಜ್ಯಮಟ್ಟದ ಸಂಪನ್ಮೂಲ ವ್ಯಕ್ತಿ ಹಾಗೂ ಭೌತಶಾಸ್ತ್ರ ಉಪನ್ಯಾಸಕ ಶ್ರೀ ಆನಂದ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಎರಡು ದಿನ ಜರುಗಿದ ಈ ತರಬೇತಿ ಕಾರ್ಯಾಗಾರದಲ್ಲಿ 2020 ರ ದ್ವಿತೀಯ ಪಿ.ಯು.ಸಿ ಫಲಿತಾಂಶವನ್ನು ಹೇಗೆ ಸುಧಾರಿಸಬಹುದು ಹಾಗೂ ಪರೀಕ್ಷೆಗೆ ವಿದ್ಯಾರ್ಥಿಗಳು ಯಾವ ರೀತಿ ತಯಾರಿ ನಡೆಸಬಹುದು ಎಂಬುದರ ಬಗ್ಗೆ ಆಯಾ ವಿಷಯಗಳಲ್ಲಿ ನುರಿತ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಭೌತಶಾಸ್ತ್ರ, ರಸಾಯನಶಾಸ್ತ್ರ, ಅರ್ಥಶಾಸ್ತ್ರ, ಇತಿಹಾಸ ಹಾಗೂ ಇಂಗ್ಲೀಷ್ ಈ ಐದು ವಿಷಯಗಳ ಉಪನ್ಯಾಸಕರಿಗೆ ತರಬೇತಿ ನೀಡಲಾಯಿತು. ಈ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಶ್ರೀ ಉಮೇಶ್ ಕರ್ಕೇರ, ಶಕ್ತಿ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಶ್ರೀ ಕೆ.ಸಿ ನಾಕ್, ಶ್ರೀ ಯೂಸೂಫ್ ಪ್ರಾಚಾರ್ಯರು ಸರ್ಕಾರಿ ಪದವಿ ಪೂರ್ವ ಕಾಲೇಜು, ಬಿ.ಮೂಡ ಬಂಟ್ವಾಳ, ಉಪಸ್ಥಿತರಿದ್ದರು.

ಶಕ್ತಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಶ್ರೀ ಪ್ರಭಾಕರ ಜಿ.ಎಸ್ ಸ್ವಾಗತಿಸಿ, ಚೇಳ್ಯಾರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ಶ್ರೀ ಜಯಾನಂದ ಸುವರ್ಣ ವಂದಿಸಿದರು. ಸಂಸ್ಕೃತ ಉಪನ್ಯಾಸಕ ಶ್ರೀನಿಧಿ ಅಭ್ಯಂಕರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದ ಆರಂಭದಲ್ಲಿ ಪೇಜಾವರ ಮಠದ ಶ್ರೀ ವಿಶ್ವೇಶ ತೀರ್ಥ ಗುರುಗಳ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.